ಮತದಾರರ ಪಟ್ಟಿಯಲ್ಲಿ ಅರ್ಹರೊಬ್ಬರ ಹೆಸರೂ ಕೈಬಿಡದಂತೆ ಜಾಗೃತಿ ವಹಿಸಿ: ದತ್ತಾತ್ರಿ.

ವಿಧಾನಸಭಾ ಕ್ಷೇತ್ರದ ಬಿಜೆಪಿ ಬಿ.ಎಲ್–2 ಕಾರ್ಯಕರ್ತರ ಕಾರ್ಯಗಾರಕ್ಕೆ ಚಾಲನೆ.

ಸಕಲೇಶಪುರ: ಮತದಾನದ ಹಕ್ಕು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ಶಕ್ತಿಯಾಗಿದ್ದು, ಮತದಾರರ ಪಟ್ಟಿಯ ಶುದ್ಧೀಕರಣ ಹಾಗೂ ನೈಜ ಮತದಾರರ ಗುರುತಿಸುವಿಕೆಗೆ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಮಹತ್ವದ ಪ್ರಕ್ರಿಯೆಯಾಗಿದೆ ಎಂದು ರಾಜ್ಯ ಬಿಜೆಪಿ ಎಸ್‌ಐಆರ್ ಸಂಚಾಲಕ ದತ್ತಾತ್ರಿ ಹೇಳಿದರು.ನಗರದ ಶಿನಪ್ಪ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬಿಜೆಪಿ ಬಿ.ಎಲ್–2 ಕಾರ್ಯಕರ್ತರ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ವರ್ಷ ನಡೆಯುವ ಸಾಮಾನ್ಯ ಮತದಾರರ ಪಟ್ಟಿ ಪರಿಷ್ಕರಣೆ (SSR)ಗೆ ಹೋಲಿಸಿದರೆ ಈ ಬಾರಿ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಳ್ಳಲಾಗುತ್ತಿದ್ದು, ಕಾರ್ಯಕರ್ತರು ಮನೆಮನೆಗೆ ತೆರಳಿ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯ ಪರಿಶೀಲನೆ ಹಾಗೂ ಹೊಂದಾಣಿಕೆ ಕಾರ್ಯ ನಡೆಸಲಿದ್ದು, ಈ ಪ್ರಕ್ರಿಯೆಗೆ ಪಕ್ಷದ ಕಾರ್ಯಕರ್ತರು ಸಹಕರಿಸಬೇಕು ಎಂದರು.ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರಜಾಪ್ರಭುತ್ವದ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಎಸ್‌ಐಆರ್ ಉಸ್ತುವಾರಿ ಡಾ. ನವೀನ್ ಮಾತನಾಡಿ, ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.ಮತದಾರರ ಪಟ್ಟಿ ಪರಿಷ್ಕರಣೆ ಹೊಸ ಪ್ರಕ್ರಿಯೆಯಲ್ಲ. ನಗರೀಕರಣ, ವಲಸೆ ಹಾಗೂ ಹೊಸ ಮತದಾರರ ಸೇರ್ಪಡೆ ಹಿನ್ನೆಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಅಗತ್ಯವಾಗಿದೆ ಎಂದು ಅವರು ಹೇಳಿದರು.ಬೂತ್ ಮಟ್ಟದಲ್ಲಿ ಮನೆಮನೆಗೆ ಭೇಟಿ ನೀಡಿ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ವಿಶೇಷವಾಗಿ ವಯೋವೃದ್ಧರು, ಕಾರ್ಮಿಕರು, ಅಕ್ಷರಜ್ಞಾನ ಕಡಿಮೆ ಇರುವವರು ಹಾಗೂ ಹೊಸ ಮತದಾರರ ವಿವರಗಳ ಪರಿಶೀಲನೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.ಒಂದೇ ವ್ಯಕ್ತಿಯ ಹೆಸರು ಎರಡು ಸ್ಥಳಗಳಲ್ಲಿ ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಾನೂನುಬಾಹಿರ ಎಂದು ಪರಿಗಣಿಸಲಾಗುತ್ತಿದ್ದು, ಪರಿಶೀಲನೆ ವೇಳೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು.ಚುನಾವಣೆಯಷ್ಟೇ ಮಹತ್ವ ಎಸ್‌ಐಆರ್‌ಗೂ: ಶಾಸಕ ಸಿಮೆಂಟ್ ಮಂಜುಶಾಸಕ ಸಿಮೆಂಟ್ ಮಂಜು ಮಾತನಾಡಿ, ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಿ ಪ್ರತಿಯೊಂದು ಬೂತ್ ಮಟ್ಟದಲ್ಲೂ ಸಕ್ರಿಯವಾಗಿ ಕೆಲಸ ಮಾಡಬೇಕು ಎಂದರು.ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ತೋರಿಸುವ ಬದ್ಧತೆ ಹಾಗೂ ಪರಿಶ್ರಮವನ್ನು ಮತದಾರರ ಪಟ್ಟಿ ಪರಿಷ್ಕರಣೆಯಲ್ಲೂ ತೋರಬೇಕು ಎಂದು ಕರೆ ನೀಡಿದರು.ಎಸ್‌ಐಆರ್‌ನ ಉದ್ದೇಶ ನೈಜ ಮತದಾರರ ಹೆಸರು ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳುವುದು, ಹೊಸ ಅರ್ಹ ಮತದಾರರನ್ನು ಸೇರ್ಪಡೆ ಮಾಡುವುದು ಹಾಗೂ ಅನರ್ಹ ಹೆಸರುಗಳನ್ನು ಪರಿಶೀಲನೆಯ ಮೂಲಕ ತೆರವುಗೊಳಿಸುವುದಾಗಿದೆ ಎಂದು ತಿಳಿಸಿದರು.ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಮತದಾರರಿಗೆ ಅಗತ್ಯ ದಾಖಲೆಗಳು ಹಾಗೂ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಬೇಕು. ಬೂತ್ ಮಟ್ಟದ ಏಜೆಂಟರು (BLA) ಹಾಗೂ ಕಾರ್ಯಕರ್ತರು ಸಮನ್ವಯದಿಂದ ಕೆಲಸ ಮಾಡಿದರೆ ಮುಂದಿನ ಚುನಾವಣಾ ಸಿದ್ಧತೆಗೆ ಸಹಕಾರಿಯಾಗಲಿದೆ ಎಂದರು.ಯಾವುದೇ ಅರ್ಹ ಮತದಾರರ ಮತದಾನದ ಹಕ್ಕು ಕಸಿಯದಂತೆ ಎಚ್ಚರಿಕೆ ವಹಿಸಿ ಎಸ್‌ಐಆರ್ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮೈಸೂರು ವಿಭಾಗೀಯ ಪ್ರಭಾರಿ ಅಶ್ವಿನಿ ಶಂಕರ್, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಮಿತ್ ಶೆಟ್ಟಿ, ಕ್ಯಾಮನಹಳ್ಳಿ ರಾಜ್ ಕುಮಾರ್, ಸಕಲೇಶಪುರ ಮಂಡಲ ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಆಲೂರು ಮಂಡಲ ಅಧ್ಯಕ್ಷ ಉಮಾ ರವಿಕುಮಾರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅಗ್ನಿ ಸೋಮಶೇಖರ್, ಮಧು ಬೊಮ್ಮನಕೆರೆ, ಅಬ್ಬನ ಕೃಷ್ಣಮೂರ್ತಿ ಸೇರಿದಂತೆ ವಿಧಾನಸಭಾ ಕ್ಷೇತ್ರದ ಎಲ್ಲಾ ಬಿ.ಎಲ್–2 ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!